ಬೆಳಗಾವಿ,ಜು.೦೬: ಸರ್ಕಾರದ ಮಾರ್ಗಸೂಚಿ ಅನ್ವಯ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆಯನ್ನು ನಗರದ ಕಟ್ಟಿಮನಿ ಸಭಾಂಗಣದಲ್ಲಿ ಜು.೧೩ ರಂದು ಸಾಂಕೇತಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜು.೬) ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆಗೆ ಅವಶ್ಯವಿರುವ ರೂಪರೇಷೆಗಳ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಹಾಗೂ ವಿವಿಧ ಕಲಾ ತಂಡಗಳು ಭಾಗವಹಿಸಲಿವೆ ಎಂದು ತಿಳಿಸಿದರು.
ಮೆರವಣಿಗೆ ಕಾರ್ಯಕ್ರಮ:
ಕೋಟೆ ಕೆರೆಯಿಂದ ನಗರದ ಕುಮಾರ ಗಂಧರ್ವ ಕಲಾಮಂದಿರದ ವರೆಗೂ ಭಾವಚಿತ್ರ ಮೆರವಣಿಗೆ ಮಾಡಲಾಗುವುದು ಹಾಗೂ ಎಲ್ಲ ಸ್ಥಳೀಯ ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಣೆ ಮಾಡಲು ಸೂಚನೆ ನೀಡಲಾಗುವದು ಎಂದು ಅಶೋಕ ದುಡಗುಂಟಿ ಅವರು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಅವರು ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯ ಕಾರ್ಯಕ್ರಮದ ರೂಪರೇಷೆಗಳ ಸಿದ್ಧತೆ ಕುರಿತು ವಿವರಿಸಿದರು.
ಹಡಪದ ಸಮಾಜದ ರಾಜ್ಯ ಉಪಾಧ್ಯಕ್ಷರಾದ ಸಂತೋಷ ಹಡಪದ, ಜಿಲ್ಲಾ ಅಧ್ಯಕ್ಷರಾದ ಸುರೇಶ ಹಡಪದ, ಮುಖಂಡರಾದ ವೆಂಕಟೇಶ ಗೌಡರ, ಮಹೇಶ ತೋರೆ, ಬಸವರಾಜ ಹಡಪದ, ತಾಲೂಕ ಅಧ್ಯಕ್ಷ ಮಹಾಂತೇಶ ಹಂಪನ್ನವರ, ಮುಖಂಡರಾದ ರಾಜು ನಾವಿ, ಮಲ್ಲೇಶ ನಾವಿ, ಸಂಗಪ್ಪ ಹಡಪದ, ಹಾಗೂ ಮತ್ತಿತರು ಸಭೆಯಲ್ಲಿ ಉಪಸ್ಥಿತರಿದ್ದರು.
Gadi Kannadiga > Local News > ಜು.೧೩ ರಂದು ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಪೂರ್ವ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೂಚನೆ
ಜು.೧೩ ರಂದು ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಪೂರ್ವ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೂಚನೆ
Suresh06/07/2022
posted on
