ಬೆಳಗಾವಿ, ಡಿ.೦೬ : ವಿಧಾನಮಂಡಲದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ವಸತಿ, ಊಟೋಪಹಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಒದಗಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ವಿಧಾನಮಂಡಳ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಡಿ.೬) ನಡೆದ ವಿವಿಧ ಉಪ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
ವಸತಿ, ಊಟ, ಸಾರಿಗೆ ಸೇರಿದಂತೆ ಎಲ್ಲ ಉಪ ಸಮಿತಿಗಳು ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿವೆ.
ಸಚಿವರು, ವಿಧಾನಸಭೆ ಹಾಗೂ ಪರಿಷತ್ ಸದಸ್ಯರು ಹಾಗೂ ಉನ್ನತ ಅಧಿಕಾರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಈ ಬಾರಿ ಅಗತ್ಯವಿರುವ ಅಧಿಕಾರಿ, ಸಿಬ್ಬಂದಿಗೆ ಮಾತ್ರ ಗುರುತಿನ ಚೀಟಿಯನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು.
ಇದಲ್ಲದೇ ಸುವರ್ಣ ಸೌಧ ಹಾಗೂ ವಸತಿ ಸೌಲಭ್ಯ ಕಲ್ಪಿಸಿರುವ ಕಡೆಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಹಾಗೂ ತುರ್ತು ಚಿಕಿತ್ಸೆಗೆ ಅನುಕೂವಾಗುವಂತೆ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಾಟೀಲ ವಿವರಿಸಿದರು.
ಮಾನ್ಯ ಸಭಾಧ್ಯಕ್ಷರು ಹಾಗೂ ಸಭಾಪತಿ ಅವರಿಗೆ ಶಿಷ್ಟಾಚಾರದ ಪ್ರಕಾರ ವಸತಿ ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು. ಇದಲ್ಲದೇ ಪರಿಷತ್ತಿನ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೂಡ ವಸತಿ, ಸಾರಿಗೆ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಹೇಳಿದರು.ಪರಿಷತ್ತಿನ ವಿವಿಧ ಕೊಠಡಿಗಳಿಗೆ ನಾಮಫಲಕ ಮತ್ತಿತರ ಅಳವಡಿಕೆಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಿದರು.
ಎಲ್ಲ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಭಾಗವಹಿಸುವುದರಿಂದ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ ಅವರು, ವಸತಿ ವ್ಯವಸ್ಥೆಗೆ ಸಂಬಂಧಿಸಿದ ಸಿದ್ಧತೆಯನ್ನು ಸಭೆಯಲ್ಲಿ ತಿಳಿಸಿದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ ಅವರು ಗುರುತಿನ ಚೀಟಿ ಹಾಗೂ ವಾಹನ ಪಾಸ್ ವಿತರಣೆ ಬಗ್ಗೆ ತಿಳಿಸಿದರು.ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ವಿವಿಧ ಉಪ ಸಮಿತಿಗಳ ಅಧ್ಯಕ್ಷರು, ಪರಿಷತ್ತಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Gadi Kannadiga > Local News > ಅಧಿವೇಶನ: ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಭೇಟಿ-ಸಭೆ ಸಮರ್ಪಕ ಭದ್ರತೆ, ಊಟೋಪಹಾರ ವ್ಯವಸ್ಥೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಅಧಿವೇಶನ: ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ ಭೇಟಿ-ಸಭೆ ಸಮರ್ಪಕ ಭದ್ರತೆ, ಊಟೋಪಹಾರ ವ್ಯವಸ್ಥೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
Suresh06/12/2022
posted on
