ಕೊಪ್ಪಳ ಮಾರ್ಚ್ 03 (ಕರ್ನಾಟಕ ವಾರ್ತೆ): ಮಾರ್ಚ 10 ಮತ್ತು 11 ರಂದು ಜಿಲ್ಲೆಯಲ್ಲಿ ಅದ್ಧೂರಿಯಾಗಿ ನಡೆಯಲಿರುವ ಕೊಪ್ಪಳ ಜಿಲ್ಲಾ ರಜತ ಮಹೋತ್ಸವದ ಲೋಗೊ ಮತ್ತು ಬ್ಯಾನರ್ ಬಿಡುಗಡೆ ಕಾರ್ಯಕ್ರಮವು ಜಿಲ್ಲಾಡಳಿತದಿಂದ ಮಾರ್ಚ್ 03 ರಂದು ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್, ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಗಂಗಾವತಿ ಶಾಸಕರಾದ ಪರಣ್ಣ ಮುನವಳ್ಳಿ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಸೇರಿದಂತೆ ಇತರರು ಲೋಗೋ ಮತ್ತು ಬ್ಯಾನರನ್ನು ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಕ್ಷಿಯಾದರು.
ಈ ವೇಳೆ ಮಾತನಾಡಿದ ಸಚಿವರು, ಕೊಪ್ಪಳ ಜಿಲ್ಲಾ ರಜತ ಮಹೋತ್ಸವವು ಜಿಲ್ಲೆಯ ಜನರ ಪಾಲಿಗೆ ಊರ ಹಬ್ಬದ
ಸಂಭ್ರಮದಂತಿದೆ. ಇದನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲೆಯ ರಚನೆಗಾಗಿ ಶ್ರಮಿಸಿದ ಹೋರಾಟಗಾರರು ಹಾಗೂ ಮಹನೀಯರನ್ನು ಸನ್ಮಾನಿಸಿ, ಅವರಿಗೆ ಗೌರವ ಸಲ್ಲಿಸಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದರು.
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಮಾತನಾಡಿ, ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆಗಳು ವೇಗವಾಗಿ ನಡೆಯುತ್ತಿವೆ. ಮಾರ್ಚ್ 10 ಮತ್ತು 11 ರಂದು ಎರಡು ದಿನಗಳ ಕಾರ್ಯಕ್ರಮದ ಆಯೋಜನೆಗೆ ನಿರ್ಧರಿಸಲಾಗಿದೆ. ರಜತ ಮಹೋತ್ಸವ ನಿಮಿತ್ತ ವಿವಿಧ ಇಲಾಖೆಗಳ ಪ್ರದರ್ಶನ ಮಳಿಗೆಗಳು, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಆರೋಗ್ಯ ಮೇಳದಂತಹ ವಿಶೇಷ ಕಾರ್ಯಕ್ರಮಗಳು, ಸಾಹಿತ್ಯ ಗೋಷ್ಠಿಗಳು ಜರುಗಲಿವೆ. ಜಿಲ್ಲೆಯ ಎಲ್ಲಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ರಜತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.