This is the title of the web page
This is the title of the web page

Please assign a menu to the primary menu location under menu

State

ನರೇಗಾದಡಿ ರಾಜ್ಯದಲ್ಲಿಯೇ ಅತಿ ಹೆಚ್ಚು ಜನರಿಗೆ ಕೆಲಸ ನೀಡಿದ ಕೊಪ್ಪಳ ಜಿಲ್ಲಾ ಪಂಚಾಯತ್


ರಾಜ್ಯಕ್ಕೆ ಕೊಪ್ಪಳ ಫಸ್ಟ್, ರಾಯಚೂರು ಸೆಕೆಂಡ್ | ಜಿಲ್ಲೆಯಲ್ಲಿ ನಿತ್ಯ 1,08,389 ಜನರಿಗೆ ನರೇಗಾ ಕೆಲಸ

ನರೇಗಾದಡಿ ರಾಜ್ಯದಲ್ಲಿಯೇ ಅತಿ ಹೆಚ್ಚು ಜನರಿಗೆ ಕೆಲಸ ನೀಡಿದ ಕೊಪ್ಪಳ ಜಿಲ್ಲಾ ಪಂಚಾಯತ್
—-
*(ವಿಶೇಷ ವರದಿ)*
ಕೊಪ್ಪಳ ಏಪ್ರಿಲ್ 26 (ಕರ್ನಾಟಕ ವಾರ್ತೆ): ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರ ಗುಳೆ ತಡೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಹೆಚ್ಚು ಒತ್ತು ನೀಡಿದ್ದು, ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೊಪ್ಪಳ ಜಿಲ್ಲೆ ನಿತ್ಯ ಲಕ್ಷಕ್ಕೂ ಹೆಚ್ಚು ಜನರಿಗೆ ಕೆಲಸ ನೀಡಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಪ್ರಸ್ತುತ (ಏ.26ರಂದು) ನರೇಗಾ ಯೋಜನೆಯಡಿ 9,15,433 ಕೂಲಿಕಾರರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಕೊಪ್ಪಳ ಜಿಲ್ಲೆಯಲ್ಲೇ ಅತೀ ಹೆಚ್ಚು ಅಂದರೆ 1,08,389 ಕೂಲಿಕಾರರಿಗೆ ಕೆಲಸ ನೀಡಿ ಪ್ರಥಮ ಸ್ಥಾನದಲ್ಲಿದೆ. ರಾಯಚೂರು 1,05,816 (ದ್ವಿತೀಯ ಸ್ಥಾನ), ಬೆಳಗಾವಿ 94,590 (ತೃತೀಯ ಸ್ಥಾನ), ಬಳ್ಳಾರಿ 86,069 (ನಾಲ್ಕನೇ ಸ್ಥಾನ), ಗದಗ 78,334 (ಐದನೇ ಸ್ಥಾನ), ವಿಜಯನಗರ ಜಿಲ್ಲೆಯೂ 68,381 ಕೂಲಿಕಾರರಿಗೆ ಕೆಲಸ ನೀಡಿ ಆರನೇ ಸ್ಥಾನದಲ್ಲಿದೆ. ಉಳಿದ ಜಿಲ್ಲೆಯವರು ನಂತರದ ಸ್ಥಾನದಲ್ಲಿದ್ದಾರೆ.
*ಗುಳೆ ತಡೆಯುವಲ್ಲಿ ಯಶಸ್ವಿ:* ಪ್ರತಿ ವರ್ಷ ಬೇಸಿಗೆ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೆ ಊರಲ್ಲಿ ಕೆಲಸವಿಲ್ಲದ ಕಾರಣದಿಂದಾಗಿ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಮಾರ್ಗದರ್ಶನದಲ್ಲಿ ನರೇಗಾ ಯೋಜನೆಯಡಿ ಈ ಬಾರಿ ಐಇಸಿ ಚಟುವಟಿಕೆಯಡಿ ಹೆಚ್ಚು ಪ್ರಚಾರ ಕಾರ್ಯಕ್ರಮಗಳನ್ನು ಮಾಡಿ ಕೂಲಿಕಾರರಿಗೆ ಅಗತ್ಯ ಮಾಹಿತಿ ಒದಗಿಸಲಾಯಿತು. ಜೊತೆಗೆ 2023ರ ಏಪ್ರಿಲ್ 1ರಿಂದ ನರೇಗಾ ಕೂಲಿ ಮೊತ್ತವು 316ರೂ.ಗೆ ಹೆಚ್ಚಳವಾಗಿದೆ. ಈ ಬಗ್ಗೆ ಕೂಲಿಕಾರರಿಗೆ ಅರಿವು ಮೂಡಿಸಿ ಯೋಜನೆಯತ್ತ ಕರೆತಂದು ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸ ನೀಡಲಾಗುತ್ತಿದೆ. ಬೆಳಗಾವಿ ಹಾಗೂ ಕಲಬುರಗಿ ವಿಭಾಗ ವ್ಯಾಪ್ತಿಯ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ನರೇಗಾ ಕೆಲಸದಲ್ಲಿ ಶೇ.30 ರಿಯಾಯತಿ ಸೌಲಭ್ಯವನ್ನು ರಾಜ್ಯ ಸರಕಾರ ನೀಡಿದೆ. ಈ ಬಗ್ಗೆ ಕೊಪ್ಪಳ ಜಿಲ್ಲೆಯ ಕೂಲಿಕಾರರಿಗೆ ಹೆಚ್ಚು ಮಾಹಿತಿ ನೀಡಿದ್ದರಿಂದ ಜನ ಗುಳೆ ಬಿಟ್ಟು ನರೇಗಾದಡಿ ಇದ್ದೂರಲ್ಲೇ ಕೆಲಸ ಮಾಡುತ್ತಿದ್ದಾರೆ.
*ಕೂಲಿಕಾರರಿಗೆ ಮತದಾನದ ಮಹತ್ವ:* ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಉತ್ತಮ ಮತದಾನ ಆದರೂ ಕೆಲ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿತ್ತು. ಸದ್ಯ ನರೇಗಾದಡಿ ಕೊಪ್ಪಳ ಜಿಲ್ಲೆಯ 153 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಕೂಲಿಕಾರರು ಕೆರೆ ಹೂಳೆತ್ತುವುದು, ನಾಲಾ ಹೂಳೆತ್ತುವ ಕೆಲಸ ಮಾಡುತ್ತಿದ್ದಾರೆ. ಈ ಕಾಮಗಾರಿ ಸ್ಥಳಗಳಲ್ಲಿ ಕೂಲಿಕಾರರಿಗೆ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಇವಿಎಂ, ವಿವಿಪ್ಯಾಟ್ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡಿ ಅಣಕು ಮತದಾನ ಮಾಡಿಸುವುದು, ಮತದಾನ ಜಾಗೃತಿ ಗೀತೆಗಳನ್ನು ಪ್ರಚುರ ಪಡಿಸುವುದು ಹಾಗೂ ಕೂಲಿಕಾರರಿಗೆ ಮತದಾನದ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತಿದೆ. ಹೀಗೆ ವ್ಯಾಪಕ ಮತದಾನ ಜಾಗೃತಿ ಪ್ರಚಾರ ಹಿನ್ನೆಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೂ ಕೊಪ್ಪಳ ಜಿಲ್ಲಾ ಪಂಚಾಯತ್ ಮುಂದಾಗಿದೆ.
*ಜಿಪಂ ಸಿಇಓ ಪ್ರತಿಕ್ರಿಯೆ:* ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ಕಾಲದಲ್ಲಿ ಜನ ಕೆಲಸ ಹರಸಿ ಗುಳೆ ಹೋಗುತ್ತಿದ್ದರು. ಹೀಗಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಅನುಷ್ಠಾನದಿಂದ ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆ ಹೆಚ್ಚು ಮಾನವ ದಿನಗಳ ಸೃಜನೆ ಮಾಡಲು ಅನುಕೂಲವಾಗಿದೆ. ನರೇಗಾದಿಂದ ಜನರ ಗುಳೆಯೂ ತಪ್ಪಿದೆ. ನರೇಗಾ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಕಳೆದ ಒಂದು ತಿಂಗಳಿಂದ ನಿರಂತರವಾಗಿ ಮಾಡುತ್ತಾ ಮತದಾನ ಮಹತ್ವ ತಿಳಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಪ್ರತಿಕ್ರಿಯಿಸಿದ್ದಾರೆ.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Leave a Reply