ಬೆಳಗಾವಿ, ಮೇ ೨೪: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ನಿತೇಶ್ ಪಾಟೀಲ ಅವರು ನಗರದ ಜ್ಯೋತಿ ಕಾಲೇಜಿಗೆ ಮಂಗಳವಾರ(ಮೇ ೨೪) ಭೇಟಿ ನೀಡಿ ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತ್ತು ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸ್ಥಾಪನೆ ಕುರಿತು ಚರ್ಚೆ ನಡೆಸಿದರು.ಮತ ಎಣಿಕೆ ಕೇಂದ್ರ ಮಾತ್ರವಲ್ಲದೇ ವೀಕ್ಷಕರ ಕೊಠಡಿ, ಅಂಚೆ ಮತ ಎಣಿಕೆ ಕೊಠಡಿ, ಮಾಹಿತಿ ಕೊಠಡಿ ಸೇರಿದಂತೆ ವಿವಿಧ ಕೊಠಡಿಗಳ ಸ್ಥಾಪನೆ; ಟೇಬಲ್ ಅಳವಡಿಕೆ ಹಾಗೂ ಮಾಧ್ಯಮ ಕೇಂದ್ರ ಸ್ಥಾಪನೆಯ ಕುರಿತು ಪರಿಶೀಲಿಸಿದರು.
ವಿವಿಧ ಕೊಠಡಿಗಳನ್ನು ಪರಿಶೀಲಿಸಿ ಸ್ಥಳಾವಕಾಶದ ಕುರಿತು ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಸಕಲ ವ್ಯವಸ್ಥೆಯನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮತ ಎಣಿಕೆ ಕೊಠಡಿಗಳಲ್ಲಿ ತಲಾ ಹದಿನಾಲ್ಕು ಟೇಬಲ್ ಗಳನ್ನು ಅಳವಡಿಸಬೇಕು ಅದಕ್ಕೆ ತಕ್ಕಂತೆ ಮೂಲಸೌಕರ್ಯವನ್ನು ಕಲ್ಪಿಸಬೇಕು. ಅದೇ ರೀತಿ ಸ್ಟ್ರಾಂಗ್ ರೂಮ್ ಸ್ಥಾಪಿಸಿ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಸಿಪಿಎಡ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ:
ಮತ ಎಣಿಕೆ ಕೇಂದ್ರದ ಆವರಣದಲ್ಲಿ ಪಾರ್ಕಿಂಗ್ ಅವಕಾಶ ನೀಡದೇ ಪಕ್ಕದ ಸಿಪಿಎಡ್ ಮೈದಾನದಲ್ಲಿ ಪಾರ್ಕಿಂಗ್ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ಅವರು, ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮತ ಎಣಿಕೆ ಮತ್ತಿತರ ಕೇಂದ್ರಗಳ ಸ್ಥಾಪನೆಯ ಬಗ್ಗೆ ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ಪೊಲೀಸ್ ಆಯುಕ್ತರಾದ ರವೀಂದ್ರ ಗಡಾದಿ, ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಚುನಾವಣಾ ಶಾಖೆಯ ತಹಶೀಲ್ದಾರ ಸಾರಿಕಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Gadi Kannadiga > Local News > ಮತ ಎಣಿಕೆ ಕೇಂದ್ರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪರಿಶೀಲನೆ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸಕಲ ಸಿದ್ಧತೆಗೆ ಸೂಚನೆ
ಮತ ಎಣಿಕೆ ಕೇಂದ್ರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪರಿಶೀಲನೆ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸಕಲ ಸಿದ್ಧತೆಗೆ ಸೂಚನೆ
Suresh24/05/2022
posted on