ಬೆಳಗಾವಿ: ಇಲ್ಲಿನ 3ನೇ ರೈಲ್ವೆ ಗೇಟ್ಗೆ ನಿರ್ಮಿಸಿದ ಮೇಲ್ಸೇತುವೆಯಲ್ಲಿ ಗುಂಡಿಗಳು ಬಿದ್ದ ಪರಿಣಾಮ, ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಮೇಲ್ಸೇತುವೆಯನ್ನು ಆರು ದಿನಗಳ ಹಿಂದಷ್ಟೇ ಜನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಇದೇ ಅಕ್ಟೋಬರ್ 12ರಂದು ಮೇಲ್ಸೇತುವೆಯನ್ನು ಉದ್ಘಾಟಿಸಲಾಗಿತ್ತು. ಆದರೆ, ಸೇತುವೆಯ ಮಧ್ಯದಲ್ಲಿ ಗುಂಡಿಗಳು ಬಿದ್ದಿವೆ.
35.46 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಮೂರು ವರ್ಷ ತೆಗೆದುಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನ ಹಾಗೂ ವಾಹನ ಸಂಚಾರ ನಿಲ್ಲಿಸಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಅಭಯ ಪಾಟೀಲ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳೂ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಗುತ್ತಿಗೆದಾರರ ಬಾಕಿಯನ್ನು ತಡೆಹಿಡಿಯಬೇಕು ಎಂದು ವಾಗ್ದಾಳಿ ನಡೆಸಿದರು.