ಕೊಪ್ಪಳ ಡಿಸೆಂಬರ್ ೧೫: ಮಾನವ ಹಕ್ಕುಗಳು ಪ್ರತಿಯೊಬ್ಬ ನಾಗರಿಕರಿಗೆ ಸಮಾನವಾಗಿದ್ದು, ಅವುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಈ ದೇಶದ ಪ್ರಜೆಗಳಾದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್ ಅವರು ಹೇಳಿದರು.
ಬುಧವಾರದಂದು (ಡಿ.೧೪) ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ನಾವು ಯಾವುದೇ ರೀತಿಯ ತಾರತಮ್ಯ ಮಾಡಿದರೆ ಅದು ಕಾನೂನಿಗೆ ವಿರುದ್ಧವಾಗಿದೆ. ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಅಸ್ಪೃಶ್ಯತೆ ಆಚರಣೆಯಂತಹ ಹಲವು ಪ್ರಕರಣಗಳು ಕಂಡು ಬಂದಿದ್ದು, ಇಂತಹ ಅನಿಷ್ಠ ಪದ್ಧತಿಗಳ ಆಚರಣೆ ಮಾಡುವುದು ಅಪರಾಧವಾಗಿದೆ. ಇಂದು ನಾವು ೨೧ನೇ ಶತಮಾನದಲ್ಲಿ ಕಾಲಿಡುತ್ತಿದ್ದರೂ ಸಹ ಇಂಥ ಅಮಾನವೀಯ ಘಟನೆಗಳು ನಡೆಯುತ್ತಿರುವುದು ವಿಪರ್ಯಾಸದ ಸಂಗತಿಯಾಗಿದ್ದು, ಈ ಕುರಿತು ಸಮಾಜದ ಪ್ರಜ್ಞಾವಂತ ನಾಗರಿಕರು ಇತರರಿಗೆ ತಿಳಿ ಹೇಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು, ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಯಾವುದೇ ಜಾತಿ, ಲಿಂಗ, ಧರ್ಮ, ಜನಾಂಗ, ಬಣ್ಣ ಯಾವುದರ ಮೇಲೆಯೂ ತಾರತಮ್ಯ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತದೆ. ಹಾಗಾಗಿ ಯಾವುದೇ ದುರ್ಬಲ ವ್ಯಕ್ತಿಯ ಮೇಲೆ ಸಬಲರು ತಮ್ಮ ಬಲಪ್ರಯೋಗ ಮಾಡುವಂತಿಲ್ಲ. ಹಾಗೆ ಮಾಡಿದರೆ, ಅಂತಹವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಆದ್ದರಿಂದ ಎಲ್ಲರೂ ಸಮಾನವಾಗಿ ಜೀವಿಸಲಿಕ್ಕಾಗಿಯೇ ಈ ಮಾನವ ಹಕ್ಕುಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಪ್ರತಿಜ್ಞಾವಿಧಿ ಸ್ವೀಕಾರ;
ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಮಾನವ ಹಕ್ಕುಗಳ ದಿನದ ಪ್ರತಿಜ್ಞಾವಿಧಿಯನ್ನು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ಬೋಧಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಇದೇ ಸಂದರ್ಭದಲ್ಲಿ ಪ್ರತಿಜ್ಞೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ಬಿ.ಕಣವಿ, ಜಿಲ್ಲಾ ಸರ್ಕಾರಿ ವಕೀಲರಾದ ಆರ್.ಬಿ.ಗಣವಾರಿ, ಮಾನವ ಹಕ್ಕುಗಳು ಮತ್ತು ಭ್ರಷ್ಠಾಚಾರ ವಿರೋಧಿ ಸಂಸ್ಥೆಯ ಜಿಲ್ಲಾಧ್ಯಕ್ಷರಾದ ಕೆ.ಶ್ರೀನಿವಾಸ, ಗವಿಸಿದ್ದೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎನ್.ವೀರೇಶ್ ಕುಮಾರ, ಉಪ ಪ್ರಾಂಶುಪಾಲರಾದ ಬಾಳಪ್ಪ ತಳವಾರ, ಡಿಸಿ ಕಚೇರಿಯ ಶಿರಸ್ತೇದಾರರಾದ ಸತೀಶ, ಜಗದೀಶ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.
Gadi Kannadiga > State > ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ
ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ
Suresh15/12/2022
posted on
